ರಾಜ್ಯ
Trending

ಕದ್ದು ಮುಚ್ಚಿ ಕೊಲಂಬೋಗೆ ಹೋಗಿರಲಿಲ್ಲ ಅಂದ್ರು ಕುಮಾರಸ್ವಾಮಿ

ಬೆಂಗಳೂರು: ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ಜೆಡಿಎಸ್ ಶಾಸಕರು ಹಾಗೂ ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಶಾಸಕ ಜಮೀರ್ ಅಹ್ಮದ್ ಅವರಿಗೆ ತಿರುಗೇಟು ನೀಡಿದ್ದಾರೆ.

ಕುಮಾರಸ್ವಾಮಿ ಜತೆ ಕೊಲಂಬೋಗೆ ಹೋಗಿದ್ದೆ ಎಂಬ ಜಮೀರ್ ಅಹ್ಮದ್ ಹೇಳಿಕೆ ಬೆನ್ನಲ್ಲೇ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, 2014 ರ ಜೂನ್ ತಿಂಗಳಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವು ದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದೆ. ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ ಎಂದಿದ್ದಾರೆ.

ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ. ವಿಮಾನ ಹತ್ತುವಾಗಲೂ ಮತ್ತು ವಾಪಸ್ ಬಂದಾಗಲೂ ಪ್ರತಿಕ್ರಿಯೆ ನೀಡಿದ್ದೇನೆ.

ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೆ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೆ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಪುರಂದರ ದಾಸರ ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ……ಎಂಬ ಸಾಲುಗಳನ್ನು ಬರೆಯುವ ಮೂಲಕ ಜಮೀರ್ ಅಹ್ಮದ್ ಹೇಳಿಕೆಗೆ ಪರೋಕ್ಷ ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

Back to top button
error: Content is protected !!

Adblock Detected

Please consider supporting us by disabling your ad blocker