
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಾಯಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ಕೋವಿಡ್ 19ರ 2ನೇ ಅಲೆಯ ಪರಿಹಾರ ಪ್ಯಾಕೇಜ್ನಡಿ ಘೋಷಿಸಿದ ತಲಾ ಎರಡು ಸಾವಿರ ರೂ.ಗಳ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದರು.
ಇದು ಕೋವಿಡ್-19 ರಿಂದ ಸಂಕಷ್ಟಕ್ಕೊಳಗಾದವರಿಗೆ ಮಾನವೀಯ ನೆಲೆಯಲ್ಲಿ ಸ್ಪಂದಿಸುವ ನಮ್ಮ ಸರ್ಕಾರದ ಒಂದು ಪ್ರಯತ್ನವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಗರ ಸ್ಥಳೀಯ ಸಂಸ್ಥೆಗಳಿಂದ ಸಮೀಕ್ಷೆಯ ಮೂಲಕ 2,16,439 ಬೀದಿಬದಿ ವ್ಯಾಪಾರಸ್ಥರನ್ನು ಗುರುತಿಸಲಾಗಿದೆ. ಇವರುಗಳಿಗೆ ಗುರುತಿನ ಬೀಟಿ ಮತ್ತು ಮಾರಾಟ ಪ್ರಮಾಣ ಪತ್ರವನ್ನು ವಿತರಿಸಿ, ಬೀದಿ ವ್ಯಾಪಾರ ಕೈಗೊಳ್ಳವ ಸ್ಥಳದಲ್ಲಿ ಮೂಲಭೂತ ಸೌಕರ್ಯವನ್ನು ಕಲ್ಪಿಸಲಾಗಿದೆ. ಅಂತೆಯೇ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ. ಕೋವಿಡ್-19 ಮೊದಲನೇ ಅಲೆಯ ಸಂದರ್ಭದಲ್ಲಿ ಜೀವನೋಪಾಯ ನಿರ್ವಹಣೆಗೆ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ಪ್ರಧಾನಮಂತ್ರಿ ಬೀದಿ ವ್ಯಾಪಾರಗಳ ಆತ್ಮನಿರ್ಭರ್ ನಿಧಿ ಯೋಜನೆಯಡಿ ಪ್ರತಿ ಬೀದಿಬದಿ ವ್ಯಾಪಾರಿಗಳಿಗೆ ರೂ. 10,000/- ಗಳ ವರೆಗೆ ಬ್ಯಾಂಕ್ ಮೂಲಕ ಕಿರುಸಾಲ ಸೌಲಭ್ಯವನ್ನು ಒದಗಿಸಲಾಗಿದೆ. ಈವರೆವಿಗೂ ಯೋಜನೆಯಡಿ ರೂ. 107.92 ಕೋಟಿಗಳಷ್ಟು ಸಾಲವನ್ನು ವಿತರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದಲ್ಲಿ ಕೋವಿಡ್-19ರ 2ನೇ ಅಲೆಯ ಸಂದರ್ಭದಲ್ಲಿ ವಿಧಿಸಲಾದ ನಿರ್ಬಂಧಗಳಿಂದ ಸಂಕಷ್ಟಕ್ಕೊಳಗಾದ ಬೀದಿಬದಿ ವ್ಯಾಪಾರಿಗಳಿಗೆ ದಿನಾಂಕ: 19.05.2021 ರಂದು ಸರ್ಕಾರದಿಂದ ವಿಶೇಷ ಪ್ಯಾಕೇಜ್ನಡಿ ತಲಾ 2,000 ರೂ. ಆರ್ಥಿಕ ನೆರವನ್ನು ಘೋಷಿಸಲಾಗಿತ್ತು. ಅದರಂತೆ, 2,16,439 ಫಲಾನುಭವಿಗಳ ಪೈಕಿ ಆಧಾರ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಹಾಯಧನವನ್ನು ನೇರ ನಗದು ವರ್ಗಾವಣೆ (ಡಿಬಿಟಿ) ವಿಧಾನದ ಮೂಲಕ ತಲಾ ರೂ. 2,000/- ರಂತೆ ಒಟ್ಟು ಸಹಾಯಧನ ರೂ. 38.33 ಕೋಟಿಗಳನ್ನು ವರ್ಗಾಯಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ನುಡಿದರು.