ಹಿರಿಯ ಸಾಹಿತಿ ಚಂಪಾ ನಿಧನ

ಬೆಂಗಳೂರು: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅವರಿಗೆ 83 ವರ್ಷ ವಯಸ್ಸಾಗಿತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಚಂಪಾ ಅವರು 2017ರಲ್ಲಿ ಮೈಸೂರಿನಲ್ಲಿ ನಡೆದಿದ್ದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.
ಬಂಡಾಯ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಅವರು ಕನ್ನಡ ನಾಡು-ನುಡಿಗಾಗಿ ಹೋರಾಟ ನಡೆಸಿದ್ದರು. ಕರ್ನಾಟಕ ರಾಜ್ಯೋತ್ಸವ, ಬಸವಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.
ಧಾರವಾಡ ಮೂಲದ ಚಂಪಾ ಅವರು ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ಮೂಲತಃ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು ಕನ್ನಡ ವಿಮರ್ಶಾ ಕ್ಷೇತ್ರ, ನಾಟಕ ರಚನೆಯಲ್ಲಿ ಪ್ರಸಿದ್ಧಿ ಪಡೆದಿದ್ದರು. ಅವರು ರಚಿಸಿದ ನಾಟಕಗಳು ನಾಡಿನಲ್ಲಿ – ಹೊರನಾಡು – ವಿದೇಶಗಳಲ್ಲಿಯೂ ಪ್ರದರ್ಶಿತವಾಗಿವೆ. ಅವರ ವಿಮರ್ಶೆಯೆಂದರೆ ಬಹು ಹರಿತ ಎಂದೇ ಖ್ಯಾತವಾಗಿತ್ತು.
ಸುದೀರ್ಘ ಅವಧಿ ಅವರು “ಸಂಕ್ರಮಣ” ಹೆಸರಿನ ಸಾಹಿತ್ಯ ಪತ್ರಿಕೆಯ ಸಂಪಾದಕರು- ಪ್ರಕಾಶಕರೂ ಆಗಿದ್ದರು.
ಗೋಕಾಕ್ ಚಳವಳಿಯಲ್ಲಿಯೂ ಮುಂಚೂಣಿಯಲ್ಲಿ ಕೆಲಸ ಮಾಡಿದ್ದ ಚಂಪಾ ಅವರು ಕನ್ನಡಕ್ಕೆ ಎಲ್ಲಿಯೇ ಅನ್ಯಾಯವಾದರೂ ಧ್ವನಿ ಎತ್ತುತ್ತಿದ್ದರು.