ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆಗೆ ಸರ್ವ ಸಿದ್ಧತೆ ಮಾಡಲಾಗಿದೆ : ಡಿಡಿಪಿಐ ಮಲ್ಲೇಸ್ವಾಮಿ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ ನಿನ್ನೆ ನಡೆಯಿತು.
ಡಿಡಿಪಿಐ ಮಲ್ಲೇಸ್ವಾಮಿ ಮಾತನಾಡಿ, ಎಸೆಸೆಲ್ಸಿ ಪರೀಕ್ಷೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಕಲ ಸಿದ್ಧತೆಯನ್ನು ಮಾಡಲಾಗಿದ್ದು, ಈಗಾಗಲೇ ೯ ಮಂದಿ ಕೊರೋನ ಸೋಂಕಿತ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಅವರಿಗೆ ಕೋವಿಡ್ ಕೇರ್ ಸೆಂಟರ್ಗಳಲ್ಲಿ ಸಕಲ ವ್ಯವಸ್ಥೆಯೊಂದಿಗೆ ಪರೀಕ್ಷೆಗೆ ಸಿದ್ಧತೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ೧೭೯ ಪರೀಕ್ಷಾ ಕೇಂದ್ರಗಳಲ್ಲಿ ೨೯೩೫೧ ರೆಗ್ಯುಲರ್, ೬೯೪ ಖಾಸಗಿ, ೨೦೫0 ಶಾಲಾ ಪುನರಾವರ್ತಿತ ಅಭ್ಯರ್ಥಿಗಳು, ೫೩೮ ಖಾಸಗಿ ಪುನರಾವರ್ತಿತ ಸೇರಿದಂತೆ ಒಟ್ಟು ೩೨೬೩೬ ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಎಸೆಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧರಾಗಿರುವ ಮಕ್ಕಳು ಒಂದು ವೇಳೆ ಕೊರೋನ ಸೋಂಕಿಗೆ ಒಳಪಟ್ಟಿದ್ದಲ್ಲಿ ಪೋಷಕರು ಶನಿವಾರದೊಳಗೆ ಮಾಹಿತಿ ನೀಡುವಂತೆ ತಿಳಿಸಲಾಗಿತ್ತು. ಅದರಂತೆ ೯ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೋವಿಡ್ ಕೇರ್ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದಲ್ಲಿ ಪರೀಕ್ಷೆ ಎದುರಿಸಲು ಕ್ರಮಗಳ್ನು ಕೈಗೊಳ್ಳಲಾಗಿದೆ. ಕೇರಳದ ೪೪೧ ಮಂದಿ ಎಸೆಸೆಲ್ಸಿ ವಿದ್ಯಾರ್ಥಿಗಳಲ್ಲಿ ೧೨೧ ಮಕ್ಕಳು ತಲಪಾಡಿ ಮೂಲಕ ಆಗಮಿಸಲಿದ್ದು, ಅವರಿಗೆ ಕೆಎಸ್ಆರ್ಟಿಸಿ, ಖಾಸಗಿ ಬಸ್ಸುಗಳಲ್ಲಿ ಮಕ್ಕಳ ಪರೀಕ್ಷೆ ಪ್ರವೇಶ ಪತ್ರದ ಆಧಾರದಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಮನವಿ ಮಾಡಲಾಗಿದೆ. ಶಿಕ್ಷಣ ಇಲಾಖೆಯು ೪ ಬಸ್ಸುಗಳನ್ನು ತಲಪಾಡಿ ಗಡಿಯಲ್ಲಿ ಇರಿಸಲು ಸೂಚಿಸಿದೆ. ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ವಾಸವಿರುವ ಪ್ರತಿ ೪ ಕಿ.ಮೀ. ವ್ಯಾಪ್ತಿಯಲ್ಲೇ ಪರೀಕ್ಷಾ ಕೇಂದ್ರಗಳಿವೆ. ಈಗಾಗಲೇ ಸುಮಾರು ೫0 ರಷ್ಟು ವಿದ್ಯಾರ್ಥಿಗಳು ಬಸ್ಸು ವ್ಯವಸ್ಥೆಗಾಗಿ ಬೇಡಿಕೆ ಸಲ್ಲಿಸಿದ್ದು, ಅವರಿಗೆ ಸೂಕ್ತ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಈ ಬಾರಿ ಮಕ್ಕಳ ಜತೆಗೆ ಶಿಕ್ಷಕರಿಗೆ ಎಸೆಸೆಲ್ಸಿ ಪರೀಕ್ಷೆ ಹೊಸತಾಗಿದ್ದು, ಒಎಂಆರ್ ಶೀಟ್ ಆಧಾರದಲ್ಲಿ ಪರೀಕ್ಷೆ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಮಾದರಿ ಪರೀಕ್ಷೆಯನ್ನು ಕೂಡಾ ನಡೆಸಲಾಗಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳೂ ವಿದ್ಯಾಥಿಗರ್ಳಿಗೆ ತಲುಪುವಂತೆ ಮಾಡಲಾಗಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲ, ಆತಂಕವಿಲ್ಲದೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಜಿಲ್ಲೆಯಿಂದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆಯಲ್ಲಿ ನಡೆದ ಈ
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಮ.ನ.ಪಾ ಆಯುಕ್ತ ಅಕ್ಷಯ್ ಶ್ರೀಧರ್, ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೋಟ್ಯಾನ್, ಡಾ.ಭರತ್ ಶೆಟ್ಟಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.