ಉಡುಪಿ: ಗಾಂಜಾ ಪ್ರಕರಣದ ಆರೋಪಿಗೆ 3ವರ್ಷ ಜೈಲು-30,000 ದಂಡ
ಉಡುಪಿ: ಗಾಂಜಾ ಮಾರಾಟ ಪ್ರಕರಣದಲ್ಲಿ ಆರೋಪಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿಯ ಪ್ರಧಾನ ಮತ್ತು ಜಿಲ್ಲಾ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ಉಡುಪಿ ತಾಲೂಕಿನ ಹೂಡೆಯ ಅರ್ಫನ್ (27) ಶಿಕ್ಷೆಗೆ ಗುರಿಯಾಗಿರುವ ಆರೋಪಿ ಎಂದು ಗುರುತಿಸಲಾಗಿದೆ.
ಈತನನ್ನು ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಸೆನ್ ಅಪರಾಧ ಪೊಲೀಸರು 2020ರ ಸೆ. 5ರಂದು ಬಂಧಿಸಿ, 1ಕೆಜಿ 48 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದರು. ಅಂದಿನ ಸೆನ್ ಅಪರಾಧ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮ ಚಂದ್ರ ನಾಯಕ್ ಈ ಪ್ರಕರಣದ ದೂರುದಾರರಾಗಿದ್ದು, ಎಸ್ಸೈ ಲಕ್ಷ್ಮಣ ಪ್ರಕರಣದಲ್ಲಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ವಿಶೇಷ ನ್ಯಾಯಾಧೀಶ ಶಾಂತವೀರ ಶಿವಪ್ಪ, ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯ ಪಟ್ಟು, ಅರ್ಫನ್ಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 30 ಸಾವಿರ ರೂ. ದಂಡ ಮತ್ತು ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳ ಸರಳ ಕಾರಾಗೃಹ ವಾಸ ವಿಧಿಸಿ ಆದೇಶ ನೀಡಿದರು.
ಪ್ರಾಸಿಕ್ಯೂಶನ್ ಪರವಾಗಿ ಹಿರಿಯ ಪಬ್ಲಿಕ್ ಪ್ರಾಸಿಕ್ಯೂಶನ್ ಶಾಂತಿಬಾಯಿ ವಾದ ಮಂಡನೆ ಮಾಡಿದ್ದಾರೆ.