
ಮಂಗಳೂರು: ಕೋವಿಡ್ 19 ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ವರ್ಷ ಶಾಲೆಯನ್ನು ಸಂಪೂರ್ಣ ಬಂದ್ ಮಾಡಲು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ನಿರ್ಧಾರ ಕೈಗೊಂಡಿದೆ. ಧರ್ಮಸ್ಥಳ ಮತ್ತು ಉಜಿರೆ ಮಧ್ಯೆ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಎಲ್ ಕೆಜಿಯಿಂದ ಹತ್ತನೇ ತರಗತಿವರೆಗೆ ಶಾಲೆ ನಡೆಯುತ್ತಿದ್ದು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಿಕ್ಷಣ ಸಂಸ್ಥೆ ಅಧ್ಯಕ್ಷ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.
ಮಕ್ಕಳ ಪೋಷಕರ ಅಭಿಪ್ರಾಯ ಪಡೆದು ಶಾಲಾ ಆಡಳಿತ ನಿರ್ಧಾರ ಕೈಗೊಂಡಿದೆ. ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಲು ಇಚ್ಛಿಸಿದರೆ ವರ್ಗಾವಣೆ ಪತ್ರ ನೀಡಲು ನಿರ್ಧರಿಸಿದ್ದೇವೆ. ಶಾಲೆಯ ಈ ನಿರ್ಧಾರದ ಬಗ್ಗೆ ಶಿಕ್ಷಣ ಸಚಿವರಿಗೆ, ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದ್ದೇವೆ ಎಂದು ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬ್ರಹ್ಮಾನಂದ ಸರಸ್ವತಿ ತಿಳಿಸಿದ್ದಾರೆ.